ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಗಮನ ಸೆಳೆಯುತ್ತಿವೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ, ಕೆಲ ಪ್ರಭಾವಿ ವ್ಯಕ್ತಿಗಳು ತನ್ನ ಮೇಲೆ ಒತ್ತಡ ಹೇರಿದ್ದು, ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾನೆ.

ಇದೇ ವೇಳೆ, ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಈ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ನಟ ಪ್ರಕಾಶ್ ರಾಜ್, ತಮ್ಮ ವಿರುದ್ಧ ಹರಡುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ತಮ್ಮ ಹೆಸರು ಪ್ರಕರಣದೊಂದಿಗೆ ಜೋಡಿಸಲಾಗುತ್ತಿರುವುದು ಆಧಾರರಹಿತ ಹಾಗೂ ಸುಳ್ಳು ಸುದ್ದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಧರ್ಮಸ್ಥಳ ಪ್ರಕರಣದ ವಿಚಾರವಾಗಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರು ಪ್ರಸ್ತಾಪವಾಗುತ್ತಿದೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಷಯವಾಗಿದೆ. ನಾನು ಪ್ರಸ್ತುತ ಊರಿನ ಹೊರಗಿದ್ದೇನೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡುತ್ತೇನೆ. ದಯವಿಟ್ಟು ಯಾವುದೇ ವದಂತಿಗಳು ಅಥವಾ ಗಾಳಿ ಸುದ್ದಿಗಳನ್ನು ನಂಬಬೇಡಿ,” ಎಂದು ಅವರು ಹೇಳಿದ್ದಾರೆ.

ಪ್ರಕರಣದಲ್ಲಿ ಹಲವು ವ್ಯಕ್ತಿಗಳ ಹೆಸರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ವಿಚಾರ ಮತ್ತಷ್ಟು ಸಂಕೀರ್ಣ ಸ್ವರೂಪ ಪಡೆದುಕೊಂಡಿದ್ದು, ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.

Share.
Leave A Reply

Exit mobile version