ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ (37) ಅವರು ತಮ್ಮ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಕೆಲವು ತಿಂಗಳುಗಳ ಹಿಂದೆ ಆಡಳಿತಾತ್ಮಕ ಕಾರಣಗಳಿಂದ ಸಿದ್ದರಾಮಪ್ಪ ಅವರನ್ನು ಅಮಾನತುಗೊಳಿಸಿ ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅವರು ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದೆ ಧಾರವಾಡದಲ್ಲೇ ಉಳಿದುಕೊಂಡಿದ್ದರು ಎನ್ನಲಾಗಿದೆ.
ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಹಲವು ಬಾರಿ ಕರೆ ಮಾಡಿದರೂ ಅವರು ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದು, ಡಿಜಿಪಿ ಅವರಿಂದ ನಿರಂತರ ಬೆದರಿಕೆ ಹಾಗೂ ಮಾನಸಿಕ ಒತ್ತಡ ಎದುರಿಸುತ್ತಿದ್ದರು ಎಂದು ಹೇಳಿದ್ದಾರೆ. ಇದೇ ಕಾರಣದಿಂದ ಸಿದ್ದರಾಮಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸುಕೊ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡ ಸ್ಥಳ ಪರಿಶೀಲನೆ ನಡೆಸಿದ್ದು, ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪ್ರಕರಣದ ಕುರಿತು ಸಮಗ್ರ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
