ಮಂಡ್ಯ: ಲಂಚ ಸ್ವೀಕರಿಸುತ್ತಿದ್ದ ವೇಳೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಶಿವಕುಮಾರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ಬುಧವಾರ ರಾತ್ರಿ ನಡೆದಿದೆ.

ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೇಗೌಡ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಠಾಣಾ ಮಟ್ಟದಲ್ಲೇ ಜಾಮೀನು (Station Bail) ನೀಡಿ ಪ್ರಕರಣ ಇತ್ಯರ್ಥಗೊಳಿಸುವುದಾಗಿ ಹೇಳಿ ASI ಶಿವಕುಮಾರ್ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಆರೋಪಿಯ ಕುಟುಂಬದವರು ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದು, ಲಂಚದ ಬೇಡಿಕೆಗೆ ಸಂಬಂಧಿಸಿದ ದೂರವಾಣಿ ಸಂಭಾಷಣೆಯನ್ನು ಸಹ ದಾಖಲಿಸಿ ಸಾಕ್ಷ್ಯವಾಗಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬುಧವಾರ ರಾತ್ರಿ ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲೇ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ASI ಶಿವಕುಮಾರ್ ಅವರನ್ನು ರೆಡ್‌ಹ್ಯಾಂಡಾಗಿ ಬಂಧಿಸಿದ್ದಾರೆ.

ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗಳಾದ ಲೇಪಾಕ್ಷಮೂರ್ತಿ ಹಾಗೂ ಬ್ಯಾಟರಾಯಗೌಡ ನೇತೃತ್ವದಲ್ಲಿ ಈ ದಾಳಿ ಕಾರ್ಯಾಚರಣೆ ನಡೆದಿದ್ದು, ಬಂಧಿತ ASIಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share.
Leave A Reply

Exit mobile version